ಹಾಲಹಿಡಿದು ಬೆಣ್ಣೆಯನರಸಲುಂಟೆ ?

ಹಾಲಹಿಡಿದು ಬೆಣ್ಣೆಯನರಸಲುಂಟೆ ?
ಲಿಂಗವಹಿಡಿದು ಪುಣ್ಯತೀರ್ಥಕ್ಕೆ ಹೋಗಲುಂಟೆ ?
ಲಿಂಗದ ಪಾದತೀರ್ಥ ಪ್ರಸಾದವ ಕೊಂಡು
ಅನ್ಯಬೋಧೆ ಅನ್ಯಶಾಸ್ತ್ರಕ್ಕೆ ಹಾರೈಸಲೇತಕ್ಕೆ ?
ಇಷ್ಟಲಿಂಗವಿದ್ದಂತೆ ಸ್ಥಾವರಲಿಂಗಕ್ಕೆ ಶರಣೆಂದೆನಾದಡೆ
ತಡೆಯದೆ ಹುಟ್ಟಿಸುವನು ಶ್ವಾನನ ಗರ್ಭದಲ್ಲಿ.
ಅದೆಂತೆಂದಡೆ ಶಿವಧರ್ಮಪುರಾಣದಲ್ಲಿ
‘ಇಷ್ಟಲಿಂಗಮವಿಶ್ವಸ್ಯ ತೀರ್ಥಲಿಂಗಸ್ಯ ಪೂಜಕಃ
ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್’ ||
ಎಂದುದಾಗಿ,
ಇದನರಿದು ಗುರು ಕೊಟ್ಟ ಲಿಂಗದಲ್ಲಿಯೆ ಎಲ್ಲಾ ತೀರ್ಥಂಗಳೂ
ಎಲ್ಲಾ ಕ್ಷೇತ್ರಂಗಳೂ ಇದ್ದಾವೆಂದು ಭಾವಿಸಿ ಮುಕ್ತರಪ್ಪುದಯ್ಯಾ.
ಇಂತಲ್ಲದೆ ಗುರು ಕೊಟ್ಟ ಲಿಂಗವ ಕಿರಿದುಮಾಡಿ,
ತೀರ್ಥಲಿಂಗವ ಹಿರಿದುಮಾಡಿ ಹೋದಾತಂಗೆ ಅಘೋರ
ನರಕ ತಪ್ಪದು ಕಾಣಾ ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *