ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ,

ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ,
ಬೆಳೆದೆನು ಅಸಂಖ್ಯಾತರ ಕರುಣದೊಳಗೆ.
ಭಾವವೆಂಬ ಹಾಲು, ಸುe್ಞನವೆಂಬ ತುಪ್ಪ,
ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ.
ಇಂತಪ್ಪ ತ್ರಿವಿಧಾಮೃತವನು ದಣಿಯಲೆರೆದು ಸಲಹಿದಿರೆನ್ನ.
ವಿವಾಹವ ಮಾಡಿದಿರಿ, ಸಯವಪ್ಪ ಗಂಡಂಗೆ ಕೊಟ್ಟಿರಿ,
ಕೊಟ್ಟ ಮನೆಗೆ ಕಳುಹಲೆಂದು
ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ.
ಬಸವಣ್ಣ ಮೆಚ್ಚಲು ಒಗತನವ ಮಾಡುವೆ.
ಚೆನ್ನಮಲ್ಲಿಕಾರ್ಜುನನ ಕೈವಿಡಿದು
ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಾರೆನು.
ಅವಧರಿಸಿ, ನಿಮ್ಮಡಿಗಳೆಲ್ಲರೂ ಮರಳಿ ಬಿಯಂಗೈವುದು, ಶರಣಾರ್ಥಿ.

Leave a Comment

Your email address will not be published. Required fields are marked *